ಮೈಸೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ವಶಕ್ಕೆ ಸಿಕ್ಕಿರುವ ನಾಲ್ವರು ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ. ಅತ್ಯಾಚಾರ ಪ್ರಕರಣ ನಡೆದ ಬಳಿಕ ತಮಿಳುನಾಡಿಗೆ ಪರಾರಿಯಾಗಿದ್ದರು ಎಂದು ಹೇಳಲಾಗುತ್ತಿದೆ. ತಮಗೆ ಸಿಕ್ಕಿದ ತಾಂತ್ರಿಕ ಸಾಕ್ಷ್ಯಾಧಾರಗಳ ಮೇಲೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ಹೆಚ್ಚಿನ ಮಾಹಿತಿ ಪಡೆದ ನಂತರ ಪೊಲೀಸರಿಗೆ ಘಟನೆ ಬಗ್ಗೆ ಇನ್ನಷ್ಟು ಸಾಕ್ಷ್ಯಾಧಾರಗಳು ಸಿಗಲಿದ್ದು ಇನ್ನೂ ಒಂದಿಬ್ಬರನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ನಿನ್ನೆ ಸಂತ್ರಸ್ತೆ ಯುವತಿಯ ಗೆಳೆಯನ ಹೇಳಿಕೆಯನ್ನು ಪೊಲೀಸರು ಪಡೆದಿದ್ದರು. ಅಲ್ಲದೆ ಅತ್ಯಾಚಾರ ಘಟನೆ ನಡೆದ ಸ್ಥಳವನ್ನು ಪರಿಶೀಲಿಸಿ ಆರೋಪಿಗಳ ಮೊಬೈಲ್ ಟವರ್ ಲೊಕೇಶನ್ ಜಾಡನ್ನು ಹಿಡಿದು ಸಾಗಿದ್ದರು.
ಆಗಸ್ಟ್ 24 ಮಂಗಳವಾರ ಸಾಯಂಕಾಲ 7ರಿಂದ 7-30ರ ಹೊತ್ತಿಗೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಿರ್ಜನ ಪ್ರದೇಶಕ್ಕೆ ತೆರಳಿದ್ದ ಕಾಲೇಜು ವಿದ್ಯಾರ್ಥಿನಿ ಮತ್ತು ಆಕೆಯ ಗೆಳೆಯನ ಮೇಲೆ ಹಲ್ಲೆ ನಡೆಸಿದ್ದ ಕಾಮಾಂಧರ ಗುಂಪು ವಿದ್ಯಾರ್ಥಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿತ್ತು. ಇದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು.